ದಾವಣಗೆರೆಯಲ್ಲಿ ಮಾದಕ ವಸ್ತುಗಳ ಜಾಲ ಭೇದಿಸಿದ ಪೊಲೀಸರು, ವಸತಿ ಸಚಿವರ ಆಪ್ತ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಈ ಹಿಂದೆ ಬಂಧಿತರಾಗಿದ್ದ ಆರೋಪಿಗಳಿಂದ ಮಾದಕ ವಸ್ತು ಖರೀದಿಸಿದ್ದ ಇವರನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿದೆ. ಬಂಧಿತರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ, ವಸತಿ ಸಚಿವರ ಆಪ್ತರೂ ಸೇರಿದ್ದಾರೆ.
ದಾವಣಗೆರೆ: ವಾರದ ಹಿಂದೆ ಇಲ್ಲಿನ ಜೆ.ಎಚ್. ಪಟೇಲ್ ಬಡಾವಣೆಯ ಉದ್ಯಾನ ಒಂದರಲ್ಲಿ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸಿದ್ದವರ ಮೇಲೆ ದಾಳಿ ನಡೆಸಿ ಡ್ರಗ್ಸ್ ಜಾಲ ಪತ್ತೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾವಣಗೆರೆ ವಿದ್ಯಾನಗರ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ವಸತಿ ಸಚಿವರ ಆಪ್ತ ಸೇರಿ ನಾಲ್ವರು ಸೇರಿದ್ದು, ಒಟ್ಟು ಆರೋಪಿಗಳ ಸಂಖ್ಯೆ 8ಕ್ಕೆ ಏರಿಕೆ ಆಗಿದೆ.
ಡಿಸೆಂಬರ್ 22ರ ಸೋಮವಾರ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದವರ ಮೇಲೆ ದಾಳಿ ನಡೆಸಿದ್ದ ವಿದ್ಯಾನಗರ ಪೊಲೀಸರು, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ, ಕಾಂಗ್ರೆಸ್ ಮುಖಂಡ ಶಾಮನೂರು ವೇದಮೂರ್ತಿ, ರಾಜಸ್ತಾನ ಮೂಲದ ರಾಮ್ ಸ್ವರೂಪ್, ಧೋಲಾರಾಮ್ ಹಾಗೂ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ದೇವ್ ಕಿಶನ್ರನ್ನು ಬಂಧಿಸಿದ್ದರು. ಈ ಆರೋಪಿಗಳಿಂದ 1 ಲಕ್ಷ ರೂ. ನಗದು ಸೇರಿ ಒಟ್ಟು 11 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದರು.
ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತನ ಸೆರೆ
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಹಾಗೂ ದಾವಣಗೆರೆಯ ನಿವಾಸಿ ಅನ್ವರ್ ಬಾಷಾ, ಪಾರಸ್, ಮಂಜುನಾಥ್ ಧೋನಿ ಹಾಗೂ ಕೃಷ್ಣಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ನಾಲ್ವರು ಮೊದಲು ಬಂಧನಕ್ಕೆ ಒಳಗಾಗಿದ್ದ ಆರೋಪಿಗಳಿಂದ ಮಾದಕ ವಸ್ತುಗಳನ್ನು ಖರೀದಿಸಿದ್ದರು ಎಂಬ ಮಾಹಿತಿ ಇದೆ. ಆ ಮಾದಕ ವಸ್ತುಗಳನ್ನು ಉಪಯೋಗಿಸಿದ್ದಾರೋ ಇಲ್ಲವೋ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಕಾರ್ಯಕ್ಕೆ ಪ್ರಶಂಸೆ
ಡಿ.22ರಂದು ಮಾದಕ ಜಾಲ ಭೇದಿಸಿದ್ದ ಪೊಲೀಸರು, ಆರೋಪಿಗಳಿಂದ 10 ಲಕ್ಷ ರೂ. ಮೌಲ್ಯದ 90 ಗ್ರಾಂ ಎಂ.ಡಿ.ಎಂ.ಎ ಹಾಗೂ 200 ಗ್ರಾಂ ಓಪಿಯಂ ಎಂಬ ಮಾದಕ ವಸ್ತುಗಳನ್ನು ಮತ್ತು ಮಾದಕ ವಸ್ತು ಮಾರಾಟ ಮಾಡಿ ಸಂಗ್ರಹಿಸಿದ್ದ 1 ಲಕ್ಷ ರೂ. ಸೇರಿ ಒಟ್ಟು 11 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಡ್ರಗ್ಸ್ ಜಾಲದಲ್ಲಿ ತೊಡಗಿದ್ದ ದುಷ್ಕರ್ಮಿಗಳನ್ನು ಹೆಡೆಮುರಿ ಕಟ್ಟಿರುವ ಪೊಲೀಸರ ಬಗ್ಗೆ ಜಿಲ್ಲಾಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.







