ಮೈಸೂರು: ಹೈಡ್ರೋಜನ್ ಸಿಲಿಂಡರ್ ಸ್ಫೋಟದ ಬಳಿಕ ಎಚ್ಚೆತ್ತಿರುವ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ಅರಮನೆಯ ವರಹ ಗೇಟ್ ಬಳಿ ಅನಧಿಕೃತವಾಗಿ ತಲೆ ಎತ್ತಿದ್ದ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ. ಮತ್ತೆ ಆ ಅಂಗಡಿಗಳು ತಲೆ ಎತ್ತದಂತೆ ನಿಗಾವಹಿಸಲು ಪೊಲೀಸ್ ಕಮಾಂಡೋ ಪಡೆಯನ್ನು ನಿಯೋಜಿಸಲಾಗಿದೆ.
ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗ ಬಿ.ಎನ್.ರಸ್ತೆಯಲ್ಲಿ ಡಿ. 25ರಂದು ಹೈಡ್ರೋಜನ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಅರಮನೆ ಸುತ್ತಮುತ್ತ ಸೇರಿದಂತೆ ಮೈಸೂರಿನ ಪ್ರಮುಖ ರಸ್ತೆ ಹಾಗೂ ಸ್ಥಳಗಳಲ್ಲಿರುವ ಅನಧಿಕೃತ ಬೀದಿ ಬದಿ ವ್ಯಾಪಾರಿ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲು ಸಾರ್ವಜನಿಕ ವಲಯದಿಂದ ಒತ್ತಾಯ ಕೇಳಿ ಬಂದಿತ್ತು. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಮೈಸೂರು ಅರಮನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಆಗಮಿಸುವುದರಿಂದ ಸುರಕ್ಷತೆಗಾಗಿ ಅರಮನೆಯ ವರಹ (ಗನ್ಹೌಸ್) ಗೇಟ್ ಬಳಿ ಎರಡೂ ಬದಿಯಲ್ಲಿದ್ದ 50ಕ್ಕೂ ಹೆಚ್ಚು ಅಂಗಡಿಗಳನ್ನು ಎತ್ತಂಗಡಿ ಮಾಡಿಸಲಾಗಿದೆ.







