ಕೋಗಿಲು ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆಯ ಪ್ರದೇಶವನ್ನು ಇಂದು ಅಧಿಕಾರಿಗಳೊಂದಿಗೆ ಪರಿಶೀಲಿಸಿ, ನಂತರ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದರು.
ಈ ಜಾಗವನ್ನು ಸರ್ಕಾರವು ಸುಮಾರು 9-10 ವರ್ಷಗಳ ಹಿಂದೆಯೇ ಘನತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮಂಜೂರು ಮಾಡಿತ್ತು. ಆದರೆ, ಕೆಲವರು ಈ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿ ಗುಡಿಸಲುಗಳನ್ನು ನಿರ್ಮಿಸಿದ್ದರು, ಹಲವಾರು ಬಾರಿ ಸಹ ನೋಟಿಸ್ ನೀಡಲಾಗಿತ್ತು. ನಂತರ ನಮ್ಮ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವಿಷಯ ಈಗಾಗಲೇ ಸ್ಥಳೀಯ ಶಾಸಕರ ಗಮನದಲ್ಲಿದ್ದು, ಅವರು ಈ ಬಗ್ಗೆ ಮಾತನಾಡಿದ್ದಾರೆ.
ದುರದೃಷ್ಟವಶಾತ್, ಈ ವಿಚಾರದಲ್ಲಿ ಕೆಲವರು ಅನಗತ್ಯವಾಗಿ ರಾಜಕೀಯ ಬೆರೆಸುತ್ತಿದ್ದಾರೆ. ಕೇರಳದ ಮುಖ್ಯಮಂತ್ರಿಗಳು ಸೇರಿದಂತೆ ಕಮ್ಯುನಿಸ್ಟ್ ಪಕ್ಷದ ನಾಯಕರು ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅಲ್ಪಸಂಖ್ಯಾತರ ಓಲೈಕೆಗಾಗಿ ಸುಳ್ಳು ಸಹಾನುಭೂತಿ ತೋರುತ್ತಿದ್ದಾರೆ.
ಇನ್ನು ಕೆಲವು ವ್ಯಕ್ತಿಗಳು ಬಡವರಿಂದ ಹಣ ಪಡೆದು ಸರ್ಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ್ದಾರೆ. ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸಭೆ ಕರೆದಿದ್ದು, ಅಲ್ಲಿ ಈ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗುವುದು. ಅರ್ಹ ಬಡವರಿಗೆ ಯಾವುದೇ ಅನ್ಯಾಯವಾಗದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ, ಸರ್ಕಾರಿ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ ಅಥವಾ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ ಎಂದ ಡಿ ಸಿಎಂ ಡಿಕೆ ಶಿವಕುಮಾರ್.







