ಕೋಗಿಲು ಫಕೀರ್ ಬಡಾವಣೆಗೆ ಆರ್ ಅಶೋಕ, ಚಲವಾದಿ ನಾರಾಯಣಸ್ವಾಮಿ, ಅಶ್ವತ್ಥ ನಾರಾಯಣ್ ಭೇಟಿ; ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲನೆಗೆ ಒತ್ತಾಯ
ಕೋಗಿಲು ಕ್ರಾಸ್ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಹೀಗಾಗಿ ಇದನ್ನು ಎನ್ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಕೋಗಿಲು ಕ್ರಾಸ್ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಇಂದು ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಕೇಳಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮನೆ ಕಟ್ಟಿಕೊಡುವುದೇ ಮಾನದಂಡವಾದರೆ ಇನ್ನು ಮುಂದೆ ಸರ್ಕಾರ ಯಾವ ಮುಖ ಇಟ್ಟುಕೊಂಡು ಒತ್ತುವರಿ ತೆರವು ಮಾಡಲಿದೆ? ಬೆಂಗಳೂರಿನಲ್ಲಿ 40 ಕಡೆ 150-200 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಇವರೆಲ್ಲರಿಗೂ ಮನೆ ನಿರ್ಮಿಸಿಕೊಡಲು ಸಾಧ್ಯವೇ?ಎಂದು ಪ್ರಶ್ನಿಸಿದ್ದಾರೆ.







