ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಜಿ-ರಾಮ್ ಜಿ’ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಮಾಹಿತಿ ನೀಡುವ ಮೂಲಕ ಬಡ ಕೂಲಿಕಾರರ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಯೋಜನೆಯು ಗ್ರಾಮೀಣ ಭಾಗದ ಆರ್ಥಿಕತೆಯನ್ನು ಸುಧಾರಿಸುವ ಗುರಿ ಹೊಂದಿದ್ದರೂ, ರಾಜ್ಯ ಸರ್ಕಾರ ರಾಜಕೀಯ ಲಾಭಕ್ಕಾಗಿ ಭೀತಿ ಹುಟ್ಟಿಸುತ್ತಿದೆ ಎಂದು ಅವರು ಎಕ್ಸ್ (X) ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೆಚ್ಚುವರಿ ಉದ್ಯೋಗ ದಿನಗಳು: ಈ ಹಿಂದೆ ನರೇಗಾ ಯೋಜನೆಯಡಿ 100 ದಿನಗಳ ಉದ್ಯೋಗವಿತ್ತು. ಈಗ ಅದನ್ನು 125 ದಿನಗಳಿಗೆ ಹೆಚ್ಚಿಸಲಾಗಿದೆ. ಈ ದಿನಗಳ ಹಂಚಿಕೆಯನ್ನು ಗ್ರಾಮ ಪಂಚಾಯತಿಗಳೇ ನಿರ್ಧರಿಸಬಹುದು. ಆದರೆ ಕೇಂದ್ರವೇ ನಿರ್ಧರಿಸುತ್ತದೆ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ.
ಕೃಷಿ ಸ್ನೇಹಿ ಬದಲಾವಣೆ: ಕೃಷಿ ಚಟುವಟಿಕೆಗಳ ಸಮಯದಲ್ಲಿ ರೈತರಿಗೆ ಅನುಕೂಲವಾಗಲು ವರ್ಷದಲ್ಲಿ ಎರಡು ಬಾರಿ ‘ಕೃಷಿ ರಜೆ’ ನೀಡಲಾಗಿದೆ. ಇದನ್ನು ರಾಜ್ಯ ಸರ್ಕಾರ ವಿರೋಧಿಸುತ್ತಿರುವುದು ರೈತ ವಿರೋಧಿ ಧೋರಣೆಯಾಗಿದೆ.
ಭ್ರಷ್ಟಾಚಾರಕ್ಕೆ ಬ್ರೇಕ್: ಯೋಜನೆಯಲ್ಲಿನ ಸೋರಿಕೆ ತಡೆಗಟ್ಟಲು ಬಯೋಮೆಟ್ರಿಕ್ ತಂತ್ರಜ್ಞಾನ ಅಳವಡಿಸಲಾಗಿದೆ. ಸುಳ್ಳು ಹೆಸರುಗಳಲ್ಲಿ ಹಣ ಪಡೆಯುವುದನ್ನು ತಡೆಯಲು ಈ ಕ್ರಮ ಕೈಗೊಂಡರೆ, ರಾಜ್ಯ ಸರ್ಕಾರ ಇದನ್ನು ಕಾರ್ಮಿಕರ ವಿರೋಧಿ ಎಂದು ಬಿಂಬಿಸುತ್ತಿದೆ.
ವೇಗದ ವೇತನ ಪಾವತಿ: ಕೆಲಸ ಮುಗಿದ ಒಂದು ವಾರದಿಂದ 15 ದಿನಗಳ ಒಳಗಾಗಿ ಕಡ್ಡಾಯವಾಗಿ ವೇತನ ಪಾವತಿಸುವ ವ್ಯವಸ್ಥೆ ಈ ಯೋಜನೆಯಲ್ಲಿದೆ.
ಸ್ವಾಯತ್ತತೆ ಮತ್ತು ಅಭಿವೃದ್ಧಿ
ಈ ಯೋಜನೆಯಿಂದ ಗ್ರಾಮ ಪಂಚಾಯತಿಗಳು ರಾಜ್ಯ ಸರ್ಕಾರದ ಹಸ್ತಕ್ಷೇಪವಿಲ್ಲದೆ ಸ್ವತಂತ್ರವಾಗಿ ಯೋಜನೆಗಳನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ಅವಕಾಶ ಸಿಗುತ್ತದೆ. 60:40 ಅನುಪಾತದ ಅನುದಾನ ಹಂಚಿಕೆಯನ್ನು ಸಮರ್ಪಕವಾಗಿ ಬಳಸಿ, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಬದಲು ಕೇಂದ್ರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.
“ವಿಕಸಿತ ಭಾರತದ ಗುರಿ ತಲುಪಲು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮುಖ್ಯ. ಈ ಕ್ರಾಂತಿಕಾರಿ ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.” — ಬಸವರಾಜ ಬೊಮ್ಮಾಯಿ, ಸಂಸದರು.







