ಬೆಂಗಳೂರು: ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ರಕ್ಷಿಸಲು ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯನ್ನು ಬಲಪಡಿಸಲು ಎಐಸಿಸಿ (AICC) ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ “ನರೇಗಾ ಬಚಾವೋ ಸಂಗ್ರಾಮ” ಜನಾಂದೋಲನದ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಹತ್ವದ ಸಭೆ ನಡೆಯಿತು.
ವಿಶೇಷ ಅಧಿವೇಶನ: ನರೇಗಾ ಯೋಜನೆಯನ್ನು ಹಳೆಯ ಸ್ವರೂಪದಲ್ಲಿ ಸಮರ್ಪಕವಾಗಿ ಜಾರಿಗೆ ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರದಲ್ಲೇ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜನಾಂದೋಲನಕ್ಕೆ ಕರೆ: ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ರಾಜ್ಯಾದ್ಯಂತ ಬೃಹತ್ ಜನಾಂದೋಲನ ರೂಪಿಸಲು ಚರ್ಚಿಸಲಾಯಿತು. ಈ ಹೋರಾಟವು ಕೇವಲ ರಾಜಕೀಯ ವೇದಿಕೆಯಾಗದೆ, ಹಳ್ಳಿ ಹಳ್ಳಿಯ ಜನರ ಧ್ವನಿಯಾಗಬೇಕು ಎಂದು ತೀರ್ಮಾನಿಸಲಾಯಿತು.
ಗ್ರಾಮ ಮಟ್ಟದ ಜಾಗೃತಿ: ಪ್ರತಿ ಗ್ರಾಮ ಪಂಚಾಯಿತಿ ಸದಸ್ಯರು ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರನ್ನು ಭೇಟಿ ಮಾಡಿ, ಯೋಜನೆಯ ಮಹತ್ವ ಹಾಗೂ ಪ್ರಸ್ತುತ ಎದುರಾಗಿರುವ ಸವಾಲುಗಳ ಬಗ್ಗೆ ಅರಿವು ಮೂಡಿಸಬೇಕು.
ಶಾಸಕರ ಜವಾಬ್ದಾರಿ: ಆಯಾ ಕ್ಷೇತ್ರದ ಶಾಸಕರು ತಮ್ಮ ವ್ಯಾಪ್ತಿಯಲ್ಲಿ ಜನರನ್ನು ಒಗ್ಗೂಡಿಸಿ, ಈ ಹೋರಾಟವನ್ನು ಒಂದು ಸಶಕ್ತ ಜನಾಂದೋಲನವಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಸೂಚಿಸಲಾಯಿತು.
ಈ ಮಹತ್ವದ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಹಿರಿಯ ಸಚಿವರಾದ ಹೆಚ್.ಕೆ.ಪಾಟೀಲ್, ಡಾ. ಜಿ. ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಡಾ. ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಎಐಸಿಸಿ ಕಾರ್ಯದರ್ಶಿಗಳಾದ ಬಿ.ಕೆ.ಹರಿಪ್ರಸಾದ್, ಮಯೂರ್ ಜಯಕುಮಾರ್ ಸೇರಿದಂತೆ ರಾಜ್ಯದ ಎಲ್ಲಾ ಶಾಸಕರು ಮತ್ತು ಪಕ್ಷದ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಗ್ರಾಮೀಣ ಭಾಗದ ಬಡ ಜನರ ಬದುಕಿಗೆ ಆಧಾರವಾಗಿರುವ ಉದ್ಯೋಗ ಖಾತರಿ ಯೋಜನೆಯನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯತೆಯಾಗಿದೆ ಎಂದು ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಲಾಯಿತು.







