ಮಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಪ್ರವಾಸೋದ್ಯಮವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ಇಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದ ಮಂಗಳೂರಿನ ಜನ ದುಬೈ, ಮುಂಬೈ, ಬೆಂಗಳೂರಿನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳೆರಡೂ ವಿಫಲವಾಗಿವೆ ಎಂದು ಅವರು ಟೀಕಿಸಿದರು.
ನಿನ್ನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕರಾವಳಿ ಭಾಗದಲ್ಲಿ ಅಪಾರ ನೈಸರ್ಗಿಕ ಸಂಪತ್ತು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲಾಗುತ್ತಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿದ್ದು, ಅವರು ಆಸಕ್ತಿ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿ ಕರಾವಳಿಗೆ ವಿಶೇಷ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಖಾಸಗಿ ಸಹಭಾಗಿತ್ವದೊಂದಿಗೆ ಉದ್ಯೋಗ ಸೃಷ್ಟಿ ಮುಂಬೈ, ಬೆಂಗಳೂರಿನಲ್ಲಿರುವ ಉದ್ಯಮಿಗಳು ತಮ್ಮ ಸ್ವಂತ ಊರಿಗೆ ಬಂದು ಹೂಡಿಕೆ ಮಾಡಲು ಆಸಕ್ತಿ ತೋರಿಸಿದ್ದಾರೆ. ಅವರಿಗೆ ಅಗತ್ಯವಿರುವ ಸಹಕಾರವನ್ನು ಸರ್ಕಾರ ನೀಡಲಿದೆ. ಇದು ಸ್ಥಳೀಯ ಯುವಜನತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ. ಕರಾವಳಿ ಪ್ರವಾಸೋದ್ಯಮ ನೀತಿಯನ್ನು ರೂಪಿಸುವಾಗ ಉದ್ಯಮಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಮತ್ತು ಖಾಸಗಿ ಸಹಭಾಗಿತ್ವಕ್ಕೆ ಒತ್ತು ನೀಡಲಾಗುವುದು ಎಂದು ಡಿಕೆಶಿ ಹೇಳಿದರು.
ಕಂಬಳಕ್ಕೆ ಫಿದಾ ಆದ ಡಿಕೆಶಿ: ತುಳು ಭಾಷೆಗೆ ಬೇಡಿಕೆ ಮಂಗಳೂರು ಸಮೀಪದ ಉಳ್ಳಾಲ ತಾಲೂಕಿನ ನರಿಂಗಾನದಲ್ಲಿ ಆಯೋಜಿಸಲಾಗಿದ್ದ ಲವ-ಕುಶ ಜೋಡುಕರೆ ಕಂಬಳದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ಕೋಣಗಳ ಓಟಕ್ಕೆ ಮಂತ್ರಮುಗ್ಧರಾದರು. ಸ್ಪೀಕರ್ ಯು.ಟಿ. ಖಾದರ್ ಅವರ ನಾಯಕತ್ವದಲ್ಲಿ ಆಯೋಜಿಸಲಾಗಿದ್ದ ಈ ಕಂಬಳಕ್ಕೆ ಡಿಕೆಶಿ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಹಣೆಗೆ ತಿಲಕವನ್ನಿಟ್ಟು ಗೌರವಿಸಲಾಯಿತು.
ಕಂಬಳದ ಗದ್ದೆಯ ಬಳಿ ನಿಂತು ಕೋಣಗಳ ಓಟವನ್ನು ವೀಕ್ಷಿಸಿದ ಅವರು, ಕರಾವಳಿಯ ಜನರ ಉತ್ಸಾಹಕ್ಕೆ ತಲೆಬಾಗಿದರು. “ಇಂತಹ ಗ್ರಾಮೀಣ ಕ್ರೀಡೆಗಳು ನಮ್ಮ ಮಣ್ಣಿನ ಸೊಗಡನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವು ನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಪ್ರತಿಬಿಂಬಿಸುವ ಜೀವಂತ ಪರಂಪರೆ” ಎಂದು ಅವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ, ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಲು ಮತ್ತು ಅದನ್ನು ಭಾರತದ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕ್ರಮ ಕೈಗೊಳ್ಳುವಂತೆ ಡಿಸಿಎಂ ಬಳಿ ಬೇಡಿಕೆ ಇಡಲಾಯಿತು. ನೂರಾರು ಜೋಡಿ ಕೋಣಗಳು ಭಾಗವಹಿಸಿದ್ದ ಈ ಬಾರಿಯ ನರಿಂಗಾನ ಕಂಬಳವು ರೋಚಕತೆಯಿಂದ ಕೂಡಿದ್ದು, ಕಂಬಳ ಪ್ರಿಯರಿಗೆ ಅಕ್ಷರಶಃ ರಸದೌತಣ ನೀಡಿತು.







