ಮೈಸೂರು: ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಜಿಲ್ಲಾ ಪಂಚಾಯತ್ ಕಚೇರಿಯ ಡಿ.ದೇವರಾಜ್ ಅರಸು ಸಭಾಂಗಣದಲ್ಲಿ ನಡೆದ ಈ ಸಭೆಯಲ್ಲಿ ಶಿಕ್ಷಣ, ಸಾರಿಗೆ ಮತ್ತು ಸಾಮಾಜಿಕ ಕಲ್ಯಾಣ ಇಲಾಖೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಹಲವು ಮಹತ್ವದ ದಿಕ್ಕುಸೂಚಿಗಳನ್ನು ನೀಡಿದರು.
ವಿದ್ಯಾರ್ಥಿ ನಿಲಯಗಳ ಕೊರತೆ ನೀಗಿಸಲು ಕ್ರಮ
ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್ಗಳ ಬಗ್ಗೆ ಮಾಹಿತಿ ಪಡೆದ ಸಚಿವರು, “ಜಿಲ್ಲೆಯಲ್ಲಿ ಹೊಸದಾಗಿ ಅವಶ್ಯಕವಿರುವ ಹಾಸ್ಟೆಲ್ಗಳು ಹಾಗೂ ಸ್ವಂತ ಕಟ್ಟಡಗಳಿಲ್ಲದ ವಸತಿ ನಿಲಯಗಳ ಸಂಪೂರ್ಣ ವಿವರವನ್ನು ತಕ್ಷಣ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗೂ ವಸತಿ ಸೌಲಭ್ಯ ಸಿಗುವಂತಾಗಬೇಕು,” ಎಂದು ತಾಕೀತು ಮಾಡಿದರು.
ಹಾಡಿ ಜನರ ಸಬಲೀಕರಣಕ್ಕೆ ಒತ್ತು
ಆಶ್ರಮ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಹೊರಗುತ್ತಿಗೆ ನೌಕರರಿರುವ ಬಗ್ಗೆ ಚರ್ಚಿಸಿದ ಸಚಿವರು, ನೇಮಕಾತಿ ಪ್ರಕ್ರಿಯೆಗಳನ್ನು ಚುರುಕುಗೊಳಿಸುವಂತೆ ತಿಳಿಸಿದರು. ಅಲ್ಲದೆ, ಹೆಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರು ತಾಲ್ಲೂಕಿನ ಹಾಡಿ ಜನರಿಗಾಗಿ ಸ್ಥಳೀಯವಾಗಿ ಕೌಶಲ್ಯಾಧಾರಿತ ತರಬೇತಿ ಕೇಂದ್ರಗಳನ್ನು ತೆರೆಯುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜನೆ ರೂಪಿಸಲು ಸೂಚಿಸಿದರು.
ಮೈಸೂರು ನಗರ ಸಾರಿಗೆ ವ್ಯವಸ್ಥೆ ಸುಧಾರಣೆ
ನಗರದ ಸಾರಿಗೆ ಸಮಸ್ಯೆಗಳ ಬಗ್ಗೆ ಗಮನಹರಿಸಿದ ಸಚಿವರು, “ಮೈಸೂರು ನಗರದಲ್ಲಿ ಕಳೆದ 15 ವರ್ಷಗಳಿಂದ ಕೇವಲ 390 ಕೆ.ಎಸ್.ಆರ್.ಟಿ.ಸಿ ಬಸ್ಗಳು ಮಾತ್ರ ಸಂಚರಿಸುತ್ತಿವೆ. ಜನಸಂಖ್ಯೆ ಏರಿಕೆಯಾಗಿರುವುದರಿಂದ ಈ ಸಂಖ್ಯೆ ಸಾಕಾಗುತ್ತಿಲ್ಲ. ಹೆಚ್ಚಿನ ಬಸ್ಗಳು ಮತ್ತು ಹೊಸ ಡಿಪೋಗಳ ಸ್ಥಾಪನೆಗೆ ಅಗತ್ಯವಿರುವ ವರದಿಯನ್ನು ಸಲ್ಲಿಸಿ,” ಎಂದು ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಜೆಟ್ನಲ್ಲಿ ಆದ್ಯತೆ
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಸತಿ ಶಾಲೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳ ಸ್ಥಾಪನೆಗೆ ವರದಿ ಕೇಳಿದ ಸಚಿವರು, “ಇಲಾಖಾ ಮಟ್ಟದಲ್ಲಿ ಬಗೆಹರಿಯುವ ವಿಷಯಗಳನ್ನು ಆಯಾ ಮಂತ್ರಿಗಳ ಗಮನಕ್ಕೆ ತರಲಾಗುವುದು. ಬಜೆಟ್ನಲ್ಲಿ ಅನುದಾನದ ಅವಶ್ಯಕತೆ ಇರುವ ಪ್ರಸ್ತಾವನೆಗಳನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು,” ಎಂದರು.
ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (CEO), ಮೈಸೂರು ಅಭಿವೃದ್ಧಿ ಪ್ರಾಧಿಕಾರದ (MUDA) ಆಯುಕ್ತರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು







