ಹುಬ್ಬಳ್ಳಿ: “ಭಾರತದ ಆರ್ಥಿಕ ಭವಿಷ್ಯವನ್ನು ರೂಪಿಸುವಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ವಿಕಸಿತ ಭಾರತ’ ನಿರ್ಮಾಣದ ಗುರಿ ತಲುಪಲು ಎಂಎಸ್ಎಂಇಗಳನ್ನು ಬಲಪಡಿಸುವುದು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ,” ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು.
ಹುಬ್ಬಳ್ಳಿಯ ಲಘು ಉದ್ಯೋಗ ಭಾರತಿ ಘಟಕವು ಇಂದು ಆಯೋಜಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ವೇಳೆ ಉದ್ಯಮಿಗಳ ಕುಂದುಕೊರತೆಗಳನ್ನು ಆಲಿಸಿದ ಸಚಿವರು, ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂಬ ಭರವಸೆ ನೀಡಿದರು.
ಉದ್ಯಮಿಗಳ ಸಲಹೆ ಮತ್ತು ಮನವಿ:
ಸಂವಾದದಲ್ಲಿ ಪಾಲ್ಗೊಂಡಿದ್ದ ವಿವಿಧ ಕೈಗಾರಿಕಾ ಸಂಘಗಳ ಮುಖ್ಯಸ್ಥರು ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿ, ವಿವಿಧ ನೀತಿಗಳ ಬದಲಾವಣೆ ಹಾಗೂ ಸುಧಾರಣೆಗಳ ಕುರಿತು ಶಿಫಾರಸ್ಸು ಮಾಡಿದರು. ವಿಶೇಷವಾಗಿ IIIT, KLE ವಿಶ್ವವಿದ್ಯಾಲಯ ಮತ್ತು ಪ್ರಮುಖ ಇನ್ಕ್ಯುಬೇಟರ್ಗಳ ಪ್ರತಿನಿಧಿಗಳು ಉದ್ಯಮಗಳ ಆಧುನೀಕರಣ ಮತ್ತು ತಾಂತ್ರಿಕ ಬೆಳವಣಿಗೆಯ ಕುರಿತು ಅಮೂಲ್ಯ ಸಲಹೆಗಳನ್ನು ಹಂಚಿಕೊಂಡರು.
ಸರ್ಕಾರದಿಂದ ಸಂಪೂರ್ಣ ಸಹಕಾರ:
ಉದ್ಯಮಿಗಳ ಸಮಸ್ಯೆಗಳಿಗೆ ಸ್ಪಂದಿಸಿದ ಸಚಿವರು, “ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಉದ್ಯಮಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುವುದು. ನೀತಿ ರೂಪಿಸುವಾಗ ಉದ್ಯಮಿಗಳ ಶಿಫಾರಸ್ಸುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಮಹೇಶ್ ಟೆಂಗಿನಕಾಯಿ, ಲಘು ಉದ್ಯೋಗ ಭಾರತಿ ಹುಬ್ಬಳ್ಳಿ-ಧಾರವಾಡ ಘಟಕದ ಅಧ್ಯಕ್ಷ ಶ್ರೀ ಪ್ರಶಾಂತ್ ಹೆಬ್ಸೂರ್, NKSSIA ಅಧ್ಯಕ್ಷ ಶ್ರೀ ರಮೇಶ್ ಪಾಟೀಲ್ ಸೇರಿದಂತೆ ವಿವಿಧ ಕೈಗಾರಿಕಾ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪ್ರಮುಖ ಉದ್ಯಮಿಗಳು ಉಪಸ್ಥಿತರಿದ್ದರು.







