ಮಡಿಕೇರಿ: ಶಿಕ್ಷಣ ಕ್ಷೇತ್ರದ ನೌಕರರ ಆರ್ಥಿಕ ಶಕ್ತಿಯಾಗಿ ನೂರು ವರ್ಷ ಪೂರೈಸಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಹಾಗೂ ಉದ್ದೇಶಿತ ‘ಶತಸಂಭ್ರಮ’ ಕಟ್ಟಡದ ಶಂಕುಸ್ಥಾಪನಾ ಸಮಾರಂಭವು ಮಡಿಕೇರಿಯಲ್ಲಿ ಇಂದು ಅದ್ಧೂರಿಯಾಗಿ ಜರುಗಿತು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಶ್ಲಾಘನೆ
ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು, “ನೂರು ವರ್ಷಗಳ ಕಾಲ ಒಂದು ಸಹಕಾರಿ ಸಂಘ ಯಶಸ್ವಿಯಾಗಿ ಮುನ್ನಡೆದು ಬಂದಿರುವುದು ಹೆಮ್ಮೆಯ ವಿಷಯ. ವಿದ್ಯಾ ಇಲಾಖೆಯ ನೌಕರರ ಹಿತದೃಷ್ಟಿಯಿಂದ ಸ್ಥಾಪಿತವಾದ ಈ ಸಂಘವು, ಇಂದು ಸ್ವಂತ ಕಟ್ಟಡದ ಮೂಲಕ ಮತ್ತಷ್ಟು ವಿಸ್ತಾರಗೊಳ್ಳುತ್ತಿರುವುದು ಸಂತಸ ತಂದಿದೆ. ಕೊಡಗಿನ ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿಯಲ್ಲಿ ಇಂತಹ ಸಂಘಗಳ ಪಾತ್ರ ದೊಡ್ಡದಿದೆ,” ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀ ಹೆಚ್.ಎಸ್. ಚೇತನ್ ಅವರು ವಹಿಸಿದ್ದರು. ಸಂಘದ ನೂರು ವರ್ಷಗಳ ಹಾದಿ ಹಾಗೂ ಮುಂದಿನ ಯೋಜನೆಗಳ ಕುರಿತು ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ವೇದಿಕೆಯ ಮೇಲೆ ಸ್ಥಳೀಯ ಜನಪ್ರತಿನಿಧಿಗಳು, ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ನೂರಾರು ಸದಸ್ಯರು ಹಾಗೂ ವಿದ್ಯಾ ಇಲಾಖೆಯ ನೌಕರರು ಪಾಲ್ಗೊಂಡು ಸಂಭ್ರಮಿಸಿದರು.







