ಬೆಂಗಳೂರು: “ರಾಜ್ಯದಲ್ಲಿರುವ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರ ಏಳಿಗೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ (Natural Farming) ಹೆಚ್ಚಿನ ಒತ್ತು ನೀಡಬೇಕು. ರೈತರು ಬೆಳೆದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಿಸಿ ನೇರವಾಗಿ ಮಾರುಕಟ್ಟೆಗೆ ತಲುಪಿಸಿದಾಗ ಮಾತ್ರ ಕೃಷಿ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ,” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ಜಂಟಿಯಾಗಿ ಆಯೋಜಿಸಿದ್ದ “ನೈಸರ್ಗಿಕ ಕೃಷಿ” ಕುರಿತ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಜೋಯಿಡಾ ರಾಜ್ಯದ ಮೊದಲ ಸಾವಯವ ತಾಲೂಕು
ಕೃಷಿ ಇಲಾಖೆಯ ಸಾಧನೆಗಳನ್ನು ಮೆಲುಕು ಹಾಕಿದ ಸಚಿವರು, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕನ್ನು ಈಗಾಗಲೇ ರಾಜ್ಯದ ಪ್ರಥಮ ಸಾವಯವ ತಾಲೂಕೆಂದು ಘೋಷಿಸಲಾಗಿದೆ. 2025-26ನೇ ಸಾಲಿನ ಆಯವ್ಯಯದಲ್ಲಿ 1 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ನೈಜ ಕೃಷಿ ಮಾಡುವ ರೈತರಿಗೆ ರಿಯಾಯಿತಿ ದರದಲ್ಲಿ ಪರಿಕರ ಒದಗಿಸಲಾಗುವುದು. ಅಲ್ಲದೆ, ರಾಸಾಯನಿಕಗಳ ಬದಲಿಗೆ ಸಾವಯವ ಪರಿಕರ ಮಾರಾಟ ಮಾಡುವ ಮಾರಾಟಗಾರರಿಗೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದರು.
990 ಕ್ಲಸ್ಟರ್ಗಳ ಗುರುತಿಸುವಿಕೆ
ರಾಜ್ಯಾದ್ಯಂತ ನೈಜ ಕೃಷಿ ಪದ್ಧತಿ ಅಳವಡಿಸಲು ಈಗಾಗಲೇ 990 ಕ್ಲಸ್ಟರ್ಗಳನ್ನು ಗುರುತಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳನ್ನು ನೀಡಲಾಗುತ್ತಿದ್ದು, ಮಣ್ಣಿನ ಆರೋಗ್ಯ ರಕ್ಷಣೆ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
‘ಕೃಷಿ ಸಖಿ’ಯರ ಮೂಲಕ ಮಹಿಳಾ ಸಬಲೀಕರಣ
ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ರಾಜ್ಯಾದ್ಯಂತ “ಕೃಷಿ ಸಖಿ”ಯರನ್ನು ನೇಮಿಸಲಾಗಿದೆ. ಇವರು ‘ಸಂಜೀವಿನಿ’ ಯೋಜನೆಯಡಿ ತರಬೇತಿ ಪಡೆದು, ಗ್ರಾಮ ಮಟ್ಟದಲ್ಲಿ ಮಹಿಳಾ ರೈತರಿಗೆ ಆಧುನಿಕ ತಂತ್ರಜ್ಞಾನ ಮತ್ತು ನೈಸರ್ಗಿಕ ಕೃಷಿ ವಿಧಾನಗಳ ಬಗ್ಗೆ ಸಲಹೆ ನೀಡುತ್ತಿದ್ದಾರೆ ಎಂದು ಸಚಿವರು ವಿವರಿಸಿದರು.
ಮಹಿಳೆಯರೇ ಬದಲಾವಣೆಯ ಕೇಂದ್ರಬಿಂದು: ಡಾ. ಶರಣ್ ಪ್ರಕಾಶ್ ಪಾಟೀಲ್
ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, “ಕರ್ನಾಟಕದಲ್ಲಿ ಮಹಿಳೆಯರು ನೈಸರ್ಗಿಕ ಕೃಷಿ ರೂಪಾಂತರದ ಕೇಂದ್ರಬಿಂದುವಾಗಿದ್ದಾರೆ. ಸಂಜೀವಿನಿ ಅಭಿಯಾನದ ಮೂಲಕ ಸುಮಾರು 5.26 ಲಕ್ಷ ಸ್ವಸಹಾಯ ಸಂಘದ ಸದಸ್ಯರು ರಾಸಾಯನಿಕ ಮುಕ್ತ ಕೃಷಿಯಲ್ಲಿ ತೊಡಗಿಸಿಕೊಂಡು ಆರ್ಥಿಕ ಪ್ರಗತಿ ಕಾಣುತ್ತಿರುವುದು ಹೆಮ್ಮೆಯ ವಿಷಯ,” ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಸ್ವಾತಿ ಶರ್ಮಾ, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಅಭಿಯಾನದ ನಿರ್ದೇಶಕಿ ಆರ್. ಸ್ನೇಹಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.







