ಬಳ್ಳಾರಿ: “ಕೇಂದ್ರ ಸರ್ಕಾರದ VB-G RAM-G ಯೋಜನೆಯು ಗ್ರಾಮೀಣ ಭಾಗದ ಕಾರ್ಮಿಕರ ಪಾಲಿಗೆ ವರದಾನವಾಗಲಿದ್ದು, ಈ ಬಿಲ್ ಜಾರಿಯಾದರೆ ತಮ್ಮ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂಬ ಭೀತಿಯಿಂದ ಕಾಂಗ್ರೆಸ್ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ,” ಎಂದು ಶಾಸಕ ಶ್ರೀ ಗಾಲಿ ಜನಾರ್ದನ ರೆಡ್ಡಿ ಕಿಡಿಕಾರಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ VB-G RAM-G ಯೋಜನೆಯ ಜಿಲ್ಲಾ ಜಾಗೃತಿ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಯೋಜನೆಯ ಪ್ರಮುಖ ಲಕ್ಷಣಗಳು:
ಯೋಜನೆಯ ಮಹತ್ವದ ಕುರಿತು ಸವಿಸ್ತಾರವಾಗಿ ಮಾತನಾಡಿದ ಜನಾರ್ದನ ರೆಡ್ಡಿ ಅವರು ಬಿಲ್ನ ಪ್ರಮುಖ ಅಂಶಗಳನ್ನು ಪಟ್ಟಿ ಮಾಡಿದರು:
ಹೆಚ್ಚುವರಿ ಕೆಲಸದ ದಿನಗಳು: ಕಾರ್ಮಿಕರ ಕೆಲಸದ ದಿನಗಳನ್ನು 100 ರಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ.
AI ತಂತ್ರಜ್ಞಾನದ ಬಳಕೆ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಅಳವಡಿಸುವ ಮೂಲಕ ಪಾರದರ್ಶಕತೆ ತರಲಾಗುವುದು. ಇದರಿಂದ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಪೂರ್ಣ ಬ್ರೇಕ್ ಬೀಳಲಿದೆ.
ಸಕಾಲಕ್ಕೆ ವೇತನ: ಕಾರ್ಮಿಕರಿಗೆ ಹೆಚ್ಚಿನ ಭದ್ರತೆ ನೀಡುವುದರ ಜೊತೆಗೆ, ವೇತನವು ಯಾವುದೇ ವಿಳಂಬವಿಲ್ಲದೆ ನೇರವಾಗಿ ಅವರ ಖಾತೆಗೆ ತಲುಪುವ ಸುಸೂತ್ರ ವ್ಯವಸ್ಥೆ ಜಾರಿಗೆ ಬರಲಿದೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ
“ರಾಜ್ಯದ ಕಾಂಗ್ರೆಸ್ ಸರ್ಕಾರವು ಈ ಬಿಲ್ನ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಈ ಯೋಜನೆಯನ್ನು ಜೀರ್ಣಿಸಿಕೊಳ್ಳಲಾಗದೆ ಸುಳ್ಳು ಪ್ರಚಾರ ನಡೆಸುತ್ತಿದೆ. ಗ್ರಾಮೀಣ ಜನತೆ ಇಂತಹ ದಾರಿ ತಪ್ಪಿಸುವ ಮಾತುಗಳಿಗೆ ಕಿವಿಗೊಡಬಾರದು,” ಎಂದು ಅವರು ಮನವಿ ಮಾಡಿದರು.
ಮಾಜಿ ಸಚಿವರು ಹಾಗೂ ರೈತ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಎಸ್. ನಡಹಳ್ಳಿ, ಮಾಜಿ ಶಾಸಕ ಶ್ರೀ ಜಿ. ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕೀರಪ್ಪ, ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ಪ್ರಧಾನ ಕಾರ್ಯದರ್ಶಿ ಹುಡೇದ್ ಸುರೇಶ್, ಮಾಜಿ ಅಧ್ಯಕ್ಷರಾದ ಹನುಮಂತಪ್ಪ, ಸೋಮನಗೌಡ ಮತ್ತು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮಂಡಲ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.







