ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಪಾರದರ್ಶಕತೆ ತರಲು ಮತ್ತು ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಗೃಹ ಇಲಾಖೆ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ. ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನೂತನವಾಗಿ ಸ್ಥಾಪಿಸಲಾದ ‘ಸೆಂಟ್ರಲ್ ಕಮಾಂಡ್ ಸೆಂಟರ್’ ಅನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಉದ್ಘಾಟಿಸಿದರು.
24 ಗಂಟೆ ಹದ್ದಿನ ಕಣ್ಣು: ಪ್ರಮುಖ ಅಂಶಗಳು
ಸಂಪರ್ಕಿತ ಕ್ಯಾಮೆರಾಗಳು: ರಾಜ್ಯದ ವಿವಿಧ ಪ್ರಮುಖ ಕಾರಾಗೃಹಗಳಲ್ಲಿ ಅಳವಡಿಸಲಾದ ಒಟ್ಟು 1,076 ಸಿಸಿಟಿವಿ ಕ್ಯಾಮೆರಾಗಳನ್ನು ಈ ಸೆಂಟ್ರಲ್ ಕಮಾಂಡ್ ಸೆಂಟರ್ಗೆ ಕನೆಕ್ಟ್ ಮಾಡಲಾಗಿದೆ.
ರಿಯಲ್ ಟೈಮ್ ನಿಗಾ: ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳ ಸರಬರಾಜು, ಕೈದಿಗಳ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಭದ್ರತಾ ಸಿಬ್ಬಂದಿಯ ಕಾರ್ಯವೈಖರಿಯ ಮೇಲೆ ದಿನದ 24 ಗಂಟೆಯೂ ಕೇಂದ್ರ ಕಚೇರಿಯಿಂದಲೇ ನಿಗಾವಹಿಸಲಾಗುತ್ತದೆ.
ವಿಸ್ತರಣೆ: ಸದ್ಯ ಪ್ರಮುಖ ಜೈಲುಗಳಿಗೆ ಮಾತ್ರ ಸೀಮಿತವಾಗಿರುವ ಈ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಜೈಲುಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕೈಪಿಡಿ ಬಿಡುಗಡೆ ಮತ್ತು ಸುಧಾರಣಾ ಕ್ರಮಗಳು
ಇದೇ ಸಂದರ್ಭದಲ್ಲಿ ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳ ಮಾನಸಿಕ ಹಾಗೂ ಸಾಮಾಜಿಕ ಸುಧಾರಣೆಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯ ಚಟುವಟಿಕೆಗಳ ಕುರಿತಾದ ವಿಶೇಷ ಕೈಪಿಡಿಯನ್ನು ಗೃಹ ಸಚಿವರು ಬಿಡುಗಡೆ ಮಾಡಿದರು. “ಕಮಾಂಡ್ ಸೆಂಟರ್ ಕೇವಲ ಕಣ್ಗಾವಲಿಗೆ ಮಾತ್ರವಲ್ಲ, ಇದು ಕಾರಾಗೃಹಗಳ ಸುಧಾರಣಾ ಕ್ರಮದ ಒಂದು ಭಾಗವಾಗಿದೆ. ತಂತ್ರಜ್ಞಾನದ ಬಳಕೆಯಿಂದ ವ್ಯವಸ್ಥೆಯಲ್ಲಿ ಮತ್ತಷ್ಟು ಪಾರದರ್ಶಕತೆ ಬರಲಿದೆ,” ಎಂದು ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ (DG&IGP) ಡಾ. ಎಂ.ಎ. ಸಲೀಂ, ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್, ಡಿಐಜಿ ಜಿನೇಂದ್ರ ಖಣಗಾವಿ ಹಾಗೂ ಎಸ್ಪಿ ಅಂಶು ಕುಮಾರ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.







