ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಇಂದು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಲು ಸಾಲು ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ವಿವಿಧ ಗ್ರಾಮಗಳಲ್ಲಿ ಗುದ್ದಲಿ ಪೂಜೆ:
ಶಾಸಕರು ಇಂದು ಕ್ಷೇತ್ರ ವ್ಯಾಪ್ತಿಯ ಟಗರಪುರ, ಸಿಲ್ಕಲ್ಪುರ, ಕಜ್ಜಿಹುಂಡಿ, ಕೆಸ್ತೂರು, ಕಟ್ನಾವಾಡಿ, ಬನ್ನಿಸಾರಿಗೆ ಮತ್ತು ಕುಣಗಳ್ಳಿ ಗ್ರಾಮಗಳಲ್ಲಿ ಸಂಚರಿಸಿ, ಆಯಾ ಗ್ರಾಮಗಳ ಮೂಲಭೂತ ಸೌಕರ್ಯ ಹಾಗೂ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಅಭಿವೃದ್ಧಿಯೇ ನನ್ನ ಮಂತ್ರ – ಎ.ಆರ್. ಕೃಷ್ಣಮೂರ್ತಿ:
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವು ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದೆ. ಕ್ಷೇತ್ರದಲ್ಲಿ ಈಗಾಗಲೇ ಎಲ್ಲಾ ಧರ್ಮ ಮತ್ತು ವರ್ಗದವರಿಗಾಗಿ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಕೆಲವು ಈಗಾಗಲೇ ಲೋಕಾರ್ಪಣೆಗೊಂಡಿವೆ. ರಸ್ತೆ ಡಾಂಬರೀಕರಣ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ,” ಎಂದು ತಿಳಿಸಿದರು.
ಇದೇ ವೇಳೆ ಕಿನಕಳ್ಳಿಯಿಂದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಡಾಂಬರೀಕರಣ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಖುದ್ದಾಗಿ ಪರಿಶೀಲಿಸಿದ ಶಾಸಕರು, ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ:
ತಮ್ಮ ಗ್ರಾಮಗಳಿಗೆ ಭೇಟಿ ನೀಡಿದ ಜನಪ್ರಿಯ ಶಾಸಕರನ್ನು ಟಗರಪುರ, ಮಲ್ಲಹಳ್ಳಿ ಮಾಳ, ಕಜ್ಜಿಹುಂಡಿ ಹಾಗೂ ಸಿಲ್ಕಲ್ಪುರ ಗ್ರಾಮಸ್ಥರು ಬೃಹತ್ ಗಾತ್ರದ ಹಾರ ಹಾಕಿ, ಮೈಸೂರು ಪೇಟ ತೊಡಿಸಿ ಅತ್ಯಂತ ಪ್ರೀತಿಯಿಂದ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಯಳಂದೂರು ಗ್ಯಾರಂಟಿ ಅಧ್ಯಕ್ಷ ಪ್ರಭು ಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಬಸವಣ್ಣ, ಕಂದಹಳ್ಳಿ ನಂಜುಂಡಸ್ವಾಮಿ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಾದ ಎಇಇ ಗಣೇಶ್, ಎಇಇ ಅಭಿಲಾಷ್, ಎಇ ಪ್ರತಾಪ್ ಮತ್ತು ಗುತ್ತಿಗೆದಾರರಾದ ರೇವಣ್ಣ, ಮಂಜುನಾಥ್ ಉಪಸ್ಥಿತರಿದ್ದರು.







