ಮೈಸೂರು: ಸಾಂಸ್ಕೃತಿಕ ನಗರಿಯ ಐತಿಹಾಸಿಕ ಪರಂಪರೆ ಮತ್ತು ಕೈಗಾರಿಕಾ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಮೈಸೂರು-ಕೊಡಗು ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಮುಖ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಿದರು.
ಕೆಎಸ್ಐಸಿ ಆವರಣದಲ್ಲಿ ಕ್ರೀಡಾಂಗಣ ಬೇಡ
ತಿ.ನರಸೀಪುರದಲ್ಲಿರುವ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದ (KSIC) ಫಿಲೇಚರ್ ಕಾರ್ಖಾನೆಯ ಆವರಣದಲ್ಲಿ ತಾಲ್ಲೂಕು ಕ್ರೀಡಾಂಗಣ ನಿರ್ಮಿಸಲು ಯುವಜನ ಮತ್ತು ಕ್ರೀಡಾ ಇಲಾಖೆಗೆ 6 ಎಕರೆ 8 ಗುಂಟೆ ಜಾಗವನ್ನು ಹಸ್ತಾಂತರಿಸುವ ಸರ್ಕಾರದ ನಿರ್ಧಾರಕ್ಕೆ ಯದುವೀರ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕರ ಹಿತರಕ್ಷಣೆ: ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸಿದರೆ ರೇಷ್ಮೆ ನೂಲು ಬಿಚ್ಚುವ ಘಟಕದ ಕಾರ್ಯನಿರ್ವಹಣೆಗೆ ತೊಂದರೆಯಾಗಲಿದ್ದು, ನೂರಾರು ಕಾರ್ಮಿಕರ ಮತ್ತು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಪರಿಸರ ಸಂರಕ್ಷಣೆ: ಕಾರ್ಖಾನೆಯ ಆವರಣದಲ್ಲಿರುವ 500ಕ್ಕೂ ಹೆಚ್ಚು ಅಮೂಲ್ಯ ತೇಗ ಮತ್ತು ಶ್ರೀಗಂಧದ ಮರಗಳನ್ನು ಕ್ರೀಡಾಂಗಣಕ್ಕಾಗಿ ಕಡಿಯುವುದು ಸರಿಯಲ್ಲ. ಈ ಪ್ರದೇಶವು ಉತ್ತಮ ಜೀವವೈವಿಧ್ಯ ಹೊಂದಿದ್ದು, ಅದನ್ನು ಉಳಿಸಿಕೊಳ್ಳಬೇಕಿದೆ ಎಂದು ಮನವರಿಕೆ ಮಾಡಿಕೊಟ್ಟರು.
ಪರ್ಯಾಯ ಜಾಗದ ಸೂಚನೆ: ಕ್ರೀಡಾಂಗಣ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಆದರೆ ಅದಕ್ಕೆ ಪರ್ಯಾಯವಾಗಿ ಕೊರ್ಲಹಳ್ಳಿ ಅಥವಾ ಇತರ ಸರ್ಕಾರಿ ಜಾಗಗಳನ್ನು ಬಳಸಿಕೊಳ್ಳುವಂತೆ ಅವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.
ವಿಮಾನ ನಿಲ್ದಾಣ ವಿಸ್ತರಣೆಗೆ ವೇಗ
ಇದೇ ಸಂದರ್ಭದಲ್ಲಿ ಮೈಸೂರಿನ ಆರ್ಥಿಕ ಪ್ರಗತಿಗೆ ಪೂರಕವಾದ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆ ಕುರಿತೂ ಚರ್ಚಿಸಲಾಯಿತು.
ರನ್-ವೇ ವಿಸ್ತರಣೆಗಾಗಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕ್ಷಿಪ್ರಗತಿಯಲ್ಲಿ ಪೂರ್ಣಗೊಳಿಸಲು ಮತ್ತು ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತಗೊಳಿಸಲು ವಿನಂತಿಸಿದರು.
ರಾಜ್ಯ ಸರ್ಕಾರವು ಭೂಮಿ ಹಸ್ತಾಂತರಿಸಿದ ಕೂಡಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಕಾಮಗಾರಿಯನ್ನು ಆರಂಭಿಸುವುದಾಗಿ ಅವರು ಭರವಸೆ ನೀಡಿದರು.
“ಮೈಸೂರು ರೇಷ್ಮೆ ನಮ್ಮ ಹೆಮ್ಮೆ. ಅದರ ಉಳಿವಿಗೆ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆಯಾಗುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಹಾಗೆಯೇ ಮೈಸೂರಿನ ಅಭಿವೃದ್ಧಿಯ ದೃಷ್ಟಿಯಿಂದ ವಿಮಾನ ನಿಲ್ದಾಣದ ವಿಸ್ತರಣೆ ಅತಿ ಶೀಘ್ರದಲ್ಲಿ ಪೂರ್ಣಗೊಳ್ಳಬೇಕಿದೆ.” — ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.







