ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಂಜೀವಿನಿ ಅಭಿಯಾನದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ಜರುಗಿತು. ಈ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ನೇಮಕಾತಿ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದರು, ಯುವಜನತೆ ಇಂತಹ ಅವಕಾಶಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಕರೆ ನೀಡಿದರು.
ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ನಡೆದ ಈ ಮೇಳದಲ್ಲಿ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ಭಾಗವಹಿಸಿದ್ದರು:
ಒಟ್ಟು ನೊಂದಣಿ: 1290 ಅಭ್ಯರ್ಥಿಗಳು (ಆನ್ಲೈನ್: 668, ಆಫ್ಲೈನ್: 602).
ಲಿಂಗವಾರು ವಿವರ: 495 ಪುರುಷರು ಹಾಗೂ 790 ಮಹಿಳೆಯರು.
ಭಾಗವಹಿಸಿದ ಕಂಪನಿಗಳು: 101 ಪ್ರಮುಖ ಉದ್ಯೋಗದಾತ ಸಂಸ್ಥೆಗಳು.
ಸ್ಥಳದಲ್ಲೇ ಆಯ್ಕೆ: 193 ಅಭ್ಯರ್ಥಿಗಳು (85 ಪುರುಷರು, 108 ಮಹಿಳೆಯರು).
ಶಾರ್ಟ್ಲಿಸ್ಟ್: 480 ಅಭ್ಯರ್ಥಿಗಳು ಎರಡನೇ ಹಂತದ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ.
ಉದ್ಘಾಟನೆ ಮತ್ತು ಗಣ್ಯರ ಹಿತವಚನ:
ಬೆಳಿಗ್ಗೆ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಮೇಳವನ್ನು ಉದ್ಘಾಟಿಸಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಅವರು ಮಾತನಾಡಿ, “ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದು ಕಷ್ಟ. ಆದರೆ ಖಾಸಗಿ ವಲಯದಲ್ಲಿ ಅಪಾರ ಅವಕಾಶಗಳಿವೆ. ಯುವಜನರು ಕೇವಲ ಸರ್ಕಾರಿ ಕೆಲಸಕ್ಕೆ ಕಾಯದೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು” ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಕಂಪನಿಗಳು ಭಾಗವಹಿಸಿವೆ. ಕಳೆದ ವರ್ಷ 500ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಲಭಿಸಿತ್ತು, ಈ ಬಾರಿಯೂ ಹೆಚ್ಚಿನ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ ಅವರು ಜಿಲ್ಲೆಯ ಯುವಜನರು ಇಂತಹ ವೇದಿಕೆಗಳ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿ.ಪಂ ಉಪ ಕಾರ್ಯದರ್ಶಿ ಶೃತಿ ಡಿ.ಸಿ, ಜಿಲ್ಲಾ ಉದ್ಯೋಗಾಧಿಕಾರಿ ಮಹಮ್ಮದ್ ಅಕ್ಬರ್ ಸೇರಿದಂತೆ ಹಲವು ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.







