ಕನಕಪುರ: ತಾಲೂಕಿನ ಕಸಬಾ ಹೋಬಳಿಯ ಅಡನಕುಪ್ಪೆ ಶ್ರೀಕ್ಷೇತ್ರದಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ರಾಜಗೋಪುರದ ಕಳಶ ಸ್ಥಾಪನೆ, ಜೀರ್ಣೋದ್ಧಾರ ಹಾಗೂ ಕುಂಭಾಭಿಷೇಕ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಸದರಾದ ಡಿ.ಕೆ. ಸುರೇಶ್ ಅವರು ಪಾಲ್ಗೊಂಡಿದ್ದರು.
ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಪುಣ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ ಭಕ್ತಿ ಸಮರ್ಪಿಸಿದರು. ಗ್ರಾಮದ ಭಕ್ತಾದಿಗಳು ಹಾಗೂ ದೇವಸ್ಥಾನದ ಸಮಿತಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಿದ್ಧಗಂಗಾ ಶ್ರೀಗಳ ಆಶೀರ್ವಾದ: ಇದೇ ಸುಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಡಿ.ಕೆ. ಸುರೇಶ್ ಅವರು, ಶ್ರೀಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಸಮಾಜದ ಏಳಿಗೆಗಾಗಿ ಮಠದ ಶ್ರಮ ಅಪಾರವಾಗಿದ್ದು, ಶ್ರೀಗಳ ದರ್ಶನ ಪಡೆದದ್ದು ನನ್ನ ಭಾಗ್ಯ ಎಂದು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.







