ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ವತಿಯಿಂದ ಶಾಸಕರುಗಳಿಗಾಗಿ ಆಯೋಜಿಸಲಾಗಿದ್ದ “ಆಯವ್ಯಯ, ರಾಜಸ್ವ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಹಾಗೂ ಆಯವ್ಯಯ ಅನುದಾನ ಬಳಕೆ ಮತ್ತು ನಿರ್ವಹಣೆ” ಕುರಿತ ವಿಶೇಷ ಕಾರ್ಯಾಗಾರಕ್ಕೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದರು.
ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಯವರು, ರಾಜ್ಯದ ಆರ್ಥಿಕ ಶಿಸ್ತು ಮತ್ತು ಬಜೆಟ್ ಪ್ರಕ್ರಿಯೆಯ ಬಗ್ಗೆ ಜನಪ್ರತಿನಿಧಿಗಳಿಗೆ ಆಳವಾದ ಜ್ಞಾನವಿರುವುದು ಅತ್ಯಗತ್ಯ. ರಾಜಸ್ವ ಸಂಗ್ರಹಣೆ ಮತ್ತು ಅನುದಾನಗಳ ಸಮರ್ಪಕ ಬಳಕೆಯಿಂದ ಮಾತ್ರ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಆಶಯ ವ್ಯಕ್ತಪಡಿಸಿದರು. ಅಲ್ಲದೆ, ಈ ಕಾರ್ಯಾಗಾರದ ಉದ್ದೇಶ ಯಶಸ್ವಿಯಾಗಲಿ ಎಂದು ಅವರು ಶುಭ ಹಾರೈಸಿದರು.
ಗಣ್ಯರ ಉಪಸ್ಥಿತಿ: ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಭಾಗವಹಿಸಿದ್ದರು. ಸಚಿವರುಗಳಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎನ್.ಎಸ್. ಬೋಸರಾಜು, ಡಿ.ಸುಧಾಕರ್, ಮಧು ಬಂಗಾರಪ್ಪ ಸೇರಿದಂತೆ ಆಡಳಿತ ಪಕ್ಷದ ಶಾಸಕರುಗಳು ಹಾಗೂ ವಿಧಾನ ಪರಿಷತ್ ಸದಸ್ಯರುಗಳು ಕಾರ್ಯಾಗಾರದಲ್ಲಿ ಹಾಜರಿದ್ದು, ಆರ್ಥಿಕ ನಿರ್ವಹಣೆಯ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ಪಡೆದರು.







