ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್ ಸರಬರಾಜು ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು.
ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ (KFCSC) ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖ ಅನಿಲ ಪೂರೈಕೆ ಸಂಸ್ಥೆಗಳಾದ IOC, HPC, BPC ಹಾಗೂ GAIL ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಲಾಯಿತು.
ಸರಬರಾಜು ಸುಗಮಗೊಳಿಸಲು ಸೂಚನೆ: ರಾಜ್ಯದ ಕೆಲವು ಭಾಗಗಳಲ್ಲಿ ಸಿಲಿಂಡರ್ ವಿತರಣೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ತಕ್ಷಣವೇ ಸರಿಪಡಿಸಿ, ಗ್ರಾಹಕರಿಗೆ ಸಕಾಲದಲ್ಲಿ ಅನಿಲ ತಲುಪುವಂತೆ ಮಾಡಲು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತೈಲ ಕಂಪನಿಗಳ ಸಮನ್ವಯ: ಹೋಟೆಲ್ಗಳು ಮತ್ತು ಮನೆಗಳಿಗೆ ಪೂರೈಕೆಯಾಗುವ ಅನಿಲದ ಪ್ರಮಾಣದಲ್ಲಿ ಸಮತೋಲನ ಕಾಯ್ದುಕೊಳ್ಳಲು ಹಾಗೂ ಬೇಡಿಕೆಗೆ ತಕ್ಕಂತೆ ಸ್ಟಾಕ್ ನಿರ್ವಹಿಸಲು ಸೂಚಿಸಲಾಯಿತು.
ಜನರಿಗೆ ತೊಂದರೆಯಾಗದಂತೆ ಎಚ್ಚರಿಕೆ: ಹಬ್ಬಗಳ ಸರಣಿ ಇರುವುದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಅಭಾವ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಚಿವರು ಕಟ್ಟುನಿಟ್ಟಾಗಿ ತಿಳಿಸಿದರು.
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಹೆಚ್. ನಟರಾಜ್ ಉಪಸ್ಥಿತರಿದ್ದರು. ಅನಿಲ ಸಂಸ್ಥೆಗಳ ಪರವಾಗಿ ನೀರಾ ಸಿಂಗ್, ಅರುಂಧತಿ ಗೋಯಲ್, ದಿವ್ಯ, ಮುರಳಿ ಚಾರ್, ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್, ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್ ಹಾಗೂ ಪ್ರಸೂನ್ ಅವರು ಭಾಗವಹಿಸಿ, ಪ್ರಸ್ತುತ ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿ ನೀಡಿದರು.







