ಬೆಂಗಳೂರು: ಈ ವರ್ಷದ ಮಾನ್ಸೂನ್ ಅವಧಿಯಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಾಗುವ ಸಂಭವನೀಯತೆ ಇರುವುದನ್ನು ಗಮನಿಸಿ, ಉಂಟಾಗಬಹುದಾದ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಇಂದು ಪ್ರಕೃತಿ ವಿಕೋಪ ಉಪ ಸಮಿತಿ ಸಭೆ ನಡೆಯಿತು.
ವಿಕಾಸಸೌಧದಲ್ಲಿ ನಡೆದ ಈ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಅವರ ಉಪಸ್ಥಿತಿಯಲ್ಲಿ ಮಳೆ ಅಭಾವ ಎದುರಿಸಲು ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
ಕುಡಿಯುವ ನೀರಿನ ಸಿದ್ಧತೆ: ಮಳೆ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಜಿಲ್ಲೆಗಳನ್ನು ಗುರುತಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಹಾಗೂ ಪರ್ಯಾಯ ವ್ಯವಸ್ಥೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಕೃಷಿ ಚಟುವಟಿಕೆಗಳ ಮೇಲೆ ನಿಗಾ: ಮಳೆ ವಿಳಂಬ ಅಥವಾ ಕೊರತೆಯಾದಲ್ಲಿ ರೈತರಿಗೆ ಪರ್ಯಾಯ ಬೆಳೆಗಳ ಬಿತ್ತನೆ ಬಗ್ಗೆ ಮಾಹಿತಿ ನೀಡಲು ಹಾಗೂ ಬಿತ್ತನೆ ಬೀಜ, ರಸಗೊಬ್ಬರಗಳ ದಾಸ್ತಾನು ಖಚಿತಪಡಿಸಿಕೊಳ್ಳಲು ಕೃಷಿ ಇಲಾಖೆಗೆ ನಿರ್ದೇಶನ ನೀಡಲಾಯಿತು.
ಜಿಲ್ಲಾಧಿಕಾರಿಗಳಿಗೆ ಸೂಚನೆ: ಪ್ರತಿ ಜಿಲ್ಲೆಯಲ್ಲೂ ಮಳೆ ಮತ್ತು ಬೆಳೆ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇಡಲು ಮತ್ತು ಯಾವುದೇ ತುರ್ತು ಪರಿಸ್ಥಿತಿಗೆ ತಕ್ಷಣ ಸ್ಪಂದಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮೇವು ಸಂಗ್ರಹ: ಮಳೆ ಕೊರತೆಯಿಂದ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ಮೇವು ಬ್ಯಾಂಕುಗಳನ್ನು ಸ್ಥಾಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
“ರಾಜ್ಯದ ಜನತೆ ಮತ್ತು ರೈತರು ಆತಂಕಪಡುವ ಅಗತ್ಯವಿಲ್ಲ. ಮಳೆ ಕೊರತೆಯ ಮುನ್ಸೂಚನೆ ಇರುವುದರಿಂದ ಸರ್ಕಾರವು ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಣಕಾಸಿನ ಲಭ್ಯತೆ ಮತ್ತು ಇಲಾಖೆಗಳ ನಡುವಿನ ಸಮನ್ವಯತೆಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಸಭೆಯಲ್ಲಿ ಕಂದಾಯ ಇಲಾಖೆ, ಕೃಷಿ ಇಲಾಖೆ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.







