ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನದ ಕಾರ್ಯಕಲಾಪಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಲು ತುಮಕೂರಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡವೊಂದು ಇಂದು ವಿಧಾನಸೌಧದಲ್ಲಿ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿತು.
ತಮ್ಮ ತವರು ಜಿಲ್ಲೆಯ ವಿದ್ಯಾರ್ಥಿಗಳನ್ನು ಕಂಡ ಸಚಿವರು, ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡು ಅವರೊಂದಿಗೆ ಸಂವಾದ ನಡೆಸಿದರು.
ಉಭಯ ಸದನಗಳಲ್ಲಿ ನಡೆಯುವ ಚರ್ಚೆಗಳು, ಪ್ರಜಾಪ್ರಭುತ್ವದ ಕಾರ್ಯವೈಖರಿ ಮತ್ತು ಶಾಸನ ರಚನೆಯ ಪ್ರಕ್ರಿಯೆಗಳನ್ನು ವೀಕ್ಷಿಸಿದ ವಿದ್ಯಾರ್ಥಿಗಳು, ತಮ್ಮ ಹೊಸ ಅನುಭವಗಳನ್ನು ಸಚಿವರೊಂದಿಗೆ ಉತ್ಸಾಹದಿಂದ ಹಂಚಿಕೊಂಡರು. ವಿದ್ಯಾರ್ಥಿಗಳ ಜ್ಞಾನಾಸಕ್ತಿಯನ್ನು ಕಂಡು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಬಿತ್ತಲು ಮತ್ತು ನಾಗರಿಕ ಪ್ರಜ್ಞೆಯನ್ನು ಜಾಗೃತಗೊಳಿಸುವ ಉದ್ದೇಶದಿಂದ, ಸಚಿವರು ಭೇಟಿ ನೀಡಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ‘ಸಂವಿಧಾನ ಓದು’ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. ದೇಶದ ಭವಿಷ್ಯದ ಪ್ರಜೆಗಳಾಗಿ ಸಂವಿಧಾನದ ತತ್ವಗಳನ್ನು ಅರಿಯುವುದು ಇಂದಿನ ಕಾಲಘಟ್ಟದಲ್ಲಿ ಅತ್ಯವಶ್ಯಕ ಎಂದು ಅವರು ಕಿವಿಮಾತು ಹೇಳಿದರು.







