ಚಾಮರಾಜನಗರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳನ್ನು ಯಾವುದೇ ವಿಳಂಬವಿಲ್ಲದೆ ತ್ವರಿತವಾಗಿ ವಿಲೇವಾರಿ ಮಾಡಿ, ಸಂತ್ರಸ್ತರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯ ಪ್ರಮುಖ ನಿರ್ಧಾರಗಳು:
ಕಾಲಮಿತಿಯಲ್ಲಿ ಇತ್ಯರ್ಥ: ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿ, ಅವುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು. ಸಂತ್ರಸ್ತರು ಸಂಕಷ್ಟದಲ್ಲಿದ್ದು, ಅವರಿಗೆ ಸಿಗಬೇಕಾದ ಪರಿಹಾರ ಧನ ವಿಳಂಬವಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಎಂದು ಡಿಸಿ ತಿಳಿಸಿದರು.
ಖಾಯಂ ಸರ್ಕಾರಿ ಅಭಿಯೋಜಕರ ನೇಮಕ: ಪ್ರಸ್ತುತ ಸಿಬ್ಬಂದಿ ಕೊರತೆಯಿಂದ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದೆ. ಇದನ್ನು ಸರಿಪಡಿಸಲು ಜಿಲ್ಲಾಡಳಿತದ ವತಿಯಿಂದ ಕಾನೂನು ಚೌಕಟ್ಟಿನಲ್ಲಿ ಖಾಯಂ ಸರ್ಕಾರಿ ಅಭಿಯೋಜಕರನ್ನು ನೇಮಿಸಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಸಂತ್ರಸ್ತರಿಗೆ ನೆರವು: ಸಂತ್ರಸ್ತರು ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಅಗತ್ಯ ವ್ಯವಸ್ಥೆಗಳನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಖುದ್ದು ಪರಿಶೀಲಿಸಿ ಮಾಡಿಕೊಡಬೇಕು.
ಜನಜಾಗೃತಿ ಕಾರ್ಯಕ್ರಮ: ಜಿಲ್ಲಾದ್ಯಂತ ದೌರ್ಜನ್ಯ ತಡೆ ಕುರಿತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಸಮಿತಿ ಸದಸ್ಯರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.
ಪರಿಶಿಷ್ಟ ಸಮುದಾಯಕ್ಕೆ ಸ್ಮಶಾನ ಭೂಮಿ ಗುರುತಿಸಲು ತಹಶೀಲ್ದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸುಳ್ವಾಡಿ ಸಂತ್ರಸ್ತರಿಗೆ ಜೀವನೋಪಾಯಕ್ಕಾಗಿ ಭೂಮಿ ನೀಡುವ ಬೇಡಿಕೆಯನ್ನು ಪರಿಶೀಲಿಸುವುದಾಗಿ ತಿಳಿಸಿದರು. ಅಲ್ಲದೆ, ಆರೋಗ್ಯ ಇಲಾಖೆಯು ನಿಯಮಿತವಾಗಿ ಸಂತ್ರಸ್ತರಿಗೆ ಆರೋಗ್ಯ ತಪಾಸಣೆ ಹಾಗೂ ಕೌನ್ಸಲಿಂಗ್ ನಡೆಸಬೇಕು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು: ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು ಹಾಗೂ ಸಮಿತಿಯ ಸದಸ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.







