ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕಲ್ಲು ಪುಡಿ ಮಾಡುವ ಘಟಕಗಳಿಂದ (Stone Crushers) ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ನಿಯಮಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ (ಗಣಿ) ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣಾ ಪ್ರಾಧಿಕಾರದ ಮಹತ್ವದ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
ಧೂಳು ನಿಯಂತ್ರಣಕ್ಕೆ ಸೂಚನೆ: ಕ್ರಷರ್ ಘಟಕಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಧೂಳು ಆವರಿಸುತ್ತಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ಬಗ್ಗೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಪರಿಸರ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ನೀಡಿದರು.
ಅಧಿಕ ಭಾರದ ಟಿಪ್ಪರ್ಗಳ ವಿರುದ್ಧ ಕ್ರಮ: ಕ್ರಷರ್ಗಳಿಂದ ಹೊರಡುವ ಟಿಪ್ಪರ್ಗಳು ನಿಗದಿಗಿಂತ ಅಧಿಕ ಭಾರ (Overload) ಹೊತ್ತು ಸಾಗುತ್ತಿರುವುದು ರಸ್ತೆಗಳ ಹಾನಿ ಮತ್ತು ಅಪಘಾತಗಳಿಗೆ ಕಾರಣವಾಗುತ್ತಿದೆ. ಇಂತಹ ವಾಹನಗಳನ್ನು ತಪಾಸಣೆ ನಡೆಸಿ ನಿಯಮಾನುಸಾರ ದಂಡ ವಿಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಾಲೀಕರೊಂದಿಗೆ ಸಮನ್ವಯ ಸಭೆ: ಕ್ರಷರ್ ಮಾಲೀಕರೊಂದಿಗೆ ತಕ್ಷಣವೇ ಸಮನ್ವಯ ಸಭೆ ನಡೆಸಿ, ಪರಿಸರ ಮಾಲಿನ್ಯ ತಡೆಗಟ್ಟಲು ಅಗತ್ಯವಿರುವ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಪ್ರಾದೇಶಿಕ ಅರಣ್ಯ ಇಲಾಖೆಯ ಉಪಅರಣ್ಯ ಸಂರಕ್ಷಣಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.







