ಗುವಾಹಟಿ (ಅಸ್ಸಾಂ): “ಅಸ್ಸಾಂ ರಾಜ್ಯದಾದ್ಯಂತ ಜನ ಬದಲಾವಣೆಯನ್ನು ಬಯಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ, ಈಡೇರದ ಭರವಸೆಗಳು ಮತ್ತು ನಿರುದ್ಯೋಗದಿಂದ ಜನರು ತೀವ್ರ ಬೇಸತ್ತಿದ್ದಾರೆ” ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ.
ಅಸ್ಸಾಂನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಅಸ್ಸಾಂ ಉಸ್ತುವಾರಿ) ಭನ್ವರ್ ಜಿತೇಂದ್ರ ಸಿಂಗ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಪ್ರಚಲಿತ ಸಮಸ್ಯೆಗಳ ಕುರಿತು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಇತಿಹಾಸವೇ ಭಾರತದ ಪ್ರಗತಿ: “ಭಾರತದ ಇತಿಹಾಸ ಮತ್ತು ಪ್ರಗತಿಯ ಹೃದಯಭಾಗದಲ್ಲಿ ಕಾಂಗ್ರೆಸ್ ಪಕ್ಷ ಯಾವಾಗಲೂ ಇದೆ. ಅಸ್ಸಾಂನ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಮಾತ್ರ ಪರ್ಯಾಯ” ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.
ಬಿಜೆಪಿ ವೈಫಲ್ಯ: ಹತ್ತು ವರ್ಷಗಳ ಆಡಳಿತದ ನಂತರವೂ ಬಿಜೆಪಿ ಸರ್ಕಾರವು ನಿರುದ್ಯೋಗ ಮತ್ತು ಭ್ರಷ್ಟಾಚಾರದಂತಹ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾಗಿದೆ. ಜನರ ಭವಿಷ್ಯವನ್ನು ಭದ್ರಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಪಾರದರ್ಶಕ ಆಡಳಿತದ ಭರವಸೆ: ಅಸ್ಸಾಂಗೆ ಇಂದು ಪಾರದರ್ಶಕ ಆಡಳಿತ, ನೈಜ ಅಭಿವೃದ್ಧಿ ಮತ್ತು ಮುಂದಿನ ಪೀಳಿಗೆಗೆ ಉದ್ಯೋಗಾವಕಾಶಗಳ ಅಗತ್ಯವಿದೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಈ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಮುಂಬರುವ ಚುನಾವಣೆಯಲ್ಲಿ ಅಸ್ಸಾಂ ಜನರು ಕಾಂಗ್ರೆಸ್ ಪಕ್ಷದ ಮೇಲೆ ನಂಬಿಕೆ ಇಡಲಿದ್ದಾರೆ ಎಂಬ ಬಲವಾದ ವಿಶ್ವಾಸವನ್ನು ಡಿ.ಕೆ. ಶಿವಕುಮಾರ್ ವ್ಯಕ್ತಪಡಿಸಿದರು. “ನಾವು ಜನರೊಂದಿಗೆ ಕೈಜೋಡಿಸಿ ರಾಜ್ಯದ ಉಜ್ವಲ ಭವಿಷ್ಯವನ್ನು ನಿರ್ಮಿಸಲು ಸಿದ್ಧರಿದ್ದೇವೆ” ಎಂದು ಅವರು ತಿಳಿಸಿದರು.









