ಕಾಸರಗೋಡು: “ಕೇರಳದ ಗಡಿಭಾಗದ ಕನ್ನಡಿಗರ ನಾಡು ಮಂಜೇಶ್ವರದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿಗಳನ್ನು ಗೆಲ್ಲಿಸುವುದು ಇಂದಿನ ಅಗತ್ಯವಾಗಿದೆ” ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ವೇಳೆ ಹಾಲಿ ಶಾಸಕರು ಹಾಗೂ ಯುಡಿಎಫ್ ಅಭ್ಯರ್ಥಿಯಾದ ಅಶ್ರಫ್ ಅವರಿಗೆ ಮತ ನೀಡುವ ಮೂಲಕ ಹೆಚ್ಚಿನ ಬಹುಮತದಿಂದ ಆಶೀರ್ವದಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಸಮಾನತೆಯ ರಾಜಕಾರಣಕ್ಕೆ ಬೆಂಬಲ ನೀಡಿ:
ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಸಂವಿಧಾನದ ಆಶಯಗಳನ್ನು ಉಳಿಸಲು ಮತ್ತು ಜನಪರ ಆಡಳಿತವನ್ನು ಮುಂದುವರಿಸಲು ಕಾಂಗ್ರೆಸ್ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು ಅನಿವಾರ್ಯ. ಕರ್ನಾಟಕದಲ್ಲಿ ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳು ಮತ್ತು ಸಾಮಾಜಿಕ ನ್ಯಾಯದ ಹಾದಿಯೇ ನಮಗೆ ಶ್ರೀರಕ್ಷೆ ಎಂದು ಪ್ರತಿಪಾದಿಸಿದರು.
ವೇದಿಕೆಯಲ್ಲಿ ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಕರ್ನಾಟಕದ ಸಚಿವರಾದ ಬೋಸರಾಜು, ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸಂಸದರಾದ ರಾಜ್ಮೋಹನ್ ಉನ್ನಿತಾನ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು.
ಸಭೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಸಾವಿರಾರು ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿ ಮುಖ್ಯಮಂತ್ರಿಯವರ ಭಾಷಣಕ್ಕೆ ಸಾಕ್ಷಿಯಾದರು. ಗಡಿಭಾಗದ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯನ್ನು ಇದೇ ವೇಳೆ ನೀಡಲಾಯಿತು.








