ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯದ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಪಾಲಿಕೆಯ ಆಯವ್ಯಯ ಕ್ರಿಯಾಯೋಜನೆ ಹಾಗೂ ಮುಂಬರುವ ಮಳೆಗಾಲದ ಸಿದ್ಧತೆಗಳ ಕುರಿತು ಎಲ್ಲಾ ಇಲಾಖಾ ಮುಖ್ಯಸ್ಥರೊಂದಿಗೆ ಮಹತ್ವದ ಪರಾಮರ್ಶನಾ ಸಭೆ ನಡೆಸಿದರು.
ಸಭೆಯ ಪ್ರಮುಖ ವಿಷಯಗಳು:
ಮಳೆಗಾಲದ ಮುಂಜಾಗ್ರತಾ ಕ್ರಮಗಳು: ಮುಂಬರುವ ಮಳೆಗಾಲದಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಭಾಗ ಮಟ್ಟದ ಅಭಿಯಂತರರು ಎಚ್ಚರಿಕೆ ವಹಿಸಬೇಕು. ರಾಜಕಾಲುವೆ ಹೂಳೆತ್ತುವುದು ಮತ್ತು ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಯಾವುದೇ ಲೋಪವಿಲ್ಲದೆ ಕೈಗೊಳ್ಳಲು ಸೂಚಿಸಲಾಯಿತು.
ಆಯವ್ಯಯ ಕ್ರಿಯಾಯೋಜನೆ: ಪಾಲಿಕೆಯ ಆಯವ್ಯಯದಲ್ಲಿ ಘೋಷಿಸಲಾದ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ರಿಯಾಯೋಜನೆಗಳನ್ನು ಸಿದ್ಧಪಡಿಸಿ, ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪ್ರಾರಂಭಿಸಲು ನಿರ್ದೇಶನ ನೀಡಿದರು.
ಕಾಮಗಾರಿಗಳ ಪ್ರಗತಿ ಪರಿಶೀಲನೆ: ವಲಯದಲ್ಲಿ ಪ್ರಗತಿಯಲ್ಲಿರುವ ವಿವಿಧ ಇಲಾಖೆಗಳ ಸಿವಿಲ್ ಕಾಮಗಾರಿಗಳು ಹಾಗೂ ಮೂಲಭೂತ ಸೌಕರ್ಯಗಳ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸಮನ್ವಯ ಸಭೆಯಲ್ಲಿ ಪಾಲಿಕೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು: ಮಂಜುನಾಥ್ ಸ್ವಾಮಿ, ಅಪರ ಆಯುಕ್ತರು (ಆಡಳಿತ). ಸ್ವಯಂ ಪ್ರಭ ಹಾಗೂ ಬಸವರಾಜ್ ಕಬಾಡೆ, ಮುಖ್ಯ ಅಭಿಯಂತರರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಅಧೀಕ್ಷಕ ಅಭಿಯಂತರರು ಹಾಗೂ ಎಲ್ಲಾ ವಿಭಾಗದ ಕಾರ್ಯಪಾಲಕ ಅಭಿಯಂತರರು ಉಪಸ್ಥಿತರಿದ್ದು, ತಮ್ಮ ವ್ಯಾಪ್ತಿಯ ಕೆಲಸಗಳ ಬಗ್ಗೆ ಮಾಹಿತಿ ನೀಡಿದರು.






